ಮೈಸೂರು : ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳ ಶೀಘ್ರ ಅನುಷ್ಠಾನಕ್ಕೆ ತುರುವಂತೆ ಒತ್ತಾಯಿಸುತ್ತಿರುವ ಬಿಜೆಪಿ ನಾಯಕರಿಗೆ ಸಚಿವ ಮಹದೇವಪ್ಪ ತಿರುಗೇಟು ಕೊಟ್ಟಿದ್ದಾರೆ.
ನಗರದ ಜಲದರ್ಶಿನಿ ಅತಿಥಿ ಗೃಹದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, 2013 ರಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದನಂತರ ನೀಡಿದ್ದ ಎಲ್ಲಾ ಭರವಸೆಗಳನ್ನು ಈಡೇರಿಸಿದ್ದೇವೆ.ಈಗಲೂ ನಾವು ನೀಡಿರುವ ಎಲ್ಲಾ ಭರವಸೆಗಳನ್ನು ಈಡೇರಿಸುತ್ತೇವೆ.ಇದಕ್ಕೆ ಸ್ವಲ್ಪ ಕಾಲಾವಕಾಶ ಬೇಕು.ಜುಲೈ ಒಳಗೆ ಮತ್ತೊಮ್ಮೆ ಬಜೆಟ್ ಮಂಡಿಸಿ ಅನುಮೋದನೆ ಪಡೆದುಕೊಳ್ಳಬೇಕು.
ಗ್ಯಾರಂಟಿ ಯೋಜನೆ ಜಾರಿಗೆ ರೂಪು ರೇಷೆಗಳನ್ನು ಸಿದ್ದಪಡಿಸಬೇಕು.ಅಷ್ಟರಲ್ಲೇ ಅನುಷ್ಠಾನಗೊಳಿಸಿ ಎಂದು ಆತುರ ತೋರುತ್ತಿರುವ ಬಿಜೆಪಿ ನಾಯಕರ ನಿಲುವು ಸರಿಯಲ್ಲ ಎಂದರು.
ಇವರು ಕೇಂದ್ರದಲ್ಲಿ ಅಧಿಕಾರಕ್ಕೆ ಬರುವ ಮುನ್ನ ಪ್ರತಿ ವರ್ಷ ಎರಡು ಕೋಟಿ ಉದ್ಯೋಗ ನೀಡುವ ಭರವಸೆ ನೀಡಿದ್ದರು.ವಿದೇಶದಲ್ಲಿರುವ ಕಪ್ಪುಹಣ ತಂದು ಪ್ರತಿಯೊಬ್ಬರ ಬ್ಯಾಂಕ್ ಖಾತೆಗೂ 15 ಲಕ್ಷ ಹಣ ಹಾಕುತ್ತೇವೆ ಎಂದಿದ್ಧರು.ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದು 9 ವರ್ಷವಾಯಿತು.ಹಾಗಾದರೆ 18 ಕೋಟಿ ಉದ್ಯೋಗ ಕೊಟ್ಟಿದ್ದಾರಾ?.ಎಷ್ಟು ಜನರ ಖಾತೆಗೆ 15 ಲಕ್ಷ ಹಣ ಹಾಕಿದ್ದಾರೆ?ವಿದೇಶದಿಂದ ಎಷ್ಟು ಕಪ್ಪು ಹಣ ತಂದಿದ್ದಾರೆ? ಎಂದು ಪ್ರಶ್ನಿಸಿದ ಸಚಿವ ಮಹದೇವಪ್ಪ.
ಬಿಜೆಪಿಯವರು ಸೋಲಿನ ಹತಾಶೆಯಿಂದ ಹೇಳಿಕೆಗಳನ್ನು ನೀಡುತ್ತಿದ್ದಾರೆ.ಕೈಲಾಗದವನು ಮೈ ಪರಚಿಕೊಂಡಂತೆ ಬಿಜೆಪಿ ನಾಯಕರು ವರ್ತಿಸುತ್ತಿದ್ದಾರೆಂದು ಮಹದೇವಪ್ಪ ವಾಗ್ದಾಳಿ ನಡೆಸಿದರು