ಹುಬ್ಬಳ್ಳಿ : ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ರಾಜ್ಯ ಸರ್ಕಾರ ಉತ್ತಮವಾಗಿ ಕೆಲಸ ಮಾಡುತ್ತಿದೆ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹೇಳಿದರು.
ನಗರದಲ್ಲಿ ಕಾಂಗ್ರೆಸ್ ಪದಾಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ 15ರಿಂದ 20 ಸ್ಥಾನಗಳನ್ನು ಗೆಲ್ಲಲಿದೆ. ಬಿಜೆಪಿಯವರು ಆಪರೇಷನ್ ಕಮಲ ಮಾಡುತ್ತಿದ್ದಾರೆ. ಬಿಜೆಪಿ ಒಮ್ಮೆಯೂ ರಾಜ್ಯದಲ್ಲಿ ಬಹುಮತದಿಂದ ಅಧಿಕಾರಕ್ಕೆ ಬರಲಿಲ್ಲ. ಇವರ ಆಮಿಷವನ್ನು ಕಾಂಗ್ರೆಸ್ನ ಶಾಸಕರು ತಿರಸ್ಕರಿಸುತ್ತಿದ್ದಾರೆ ಎಂದರು.
ಬಿಜೆಪಿ ರಾಜ್ಯದಲ್ಲಿ ಲೀಡರ್ಲೆಸ್ ಪಾರ್ಟಿ. ಅನೇಕ ರಾಜ್ಯಗಳಲ್ಲಿ ಬಿಜೆಪಿಗೆ ಅಸ್ತಿತ್ವ ಇಲ್ಲ. ದೇಶದಾದ್ಯಂತ ಕಾಂಗ್ರೆಸ್ ಅಲೆ ಕಾಣಿಸುತ್ತಿದೆ. ಬಿಜೆಪಿ ಮತ್ತು ಜೆಡಿಎಸ್ ಹೊಂದಾಣಿಕೆಗೆ ಭಯಪಡಬೇಕಿಲ್ಲ. ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ನೇರ ಹಣಾಹಣಿಯಾದ್ರೆ ಕಾಂಗ್ರೆಸ್ಗೇ ಲಾಭ ಎಂದರು.
ಚುನಾವಣೆ ಹೊಸ್ತಿಲಲ್ಲಿ ಇಡಿ, ಐಟಿ ಮೂಲಕ ಹೆದರಿಸುವ ತಂತ್ರ ನಡೆಯುತ್ತಿದೆ. ಇದು ಪ್ರಜಾತಂತ್ರ ವ್ಯವಸ್ಥೆಯಲ್ಲಿ ಸರ್ಕಾರ ಮಾಡುವ ಸರಿಯಾದ ಕೆಲಸ ಅಲ್ಲ. ಹೆದರಿಕೆ ಮೂಲಕ ಸರ್ಕಾರ ನಡೆಸೋದು ವಿಫಲವಾಗುತ್ತೆ. ರಾಜ್ಯದಲ್ಲಿ ಕಾಂಗ್ರೆಸ್ ಗಟ್ಟಿಮುಟ್ಟಾಗಿ ಬೆಳೆಯುತ್ತಿದೆ. ನಮ್ಮ ಪ್ರಗತಿ ಬಗ್ಗೆ ಒಳ್ಳೆಯ ಪ್ರಶಂಸೆ ವ್ಯಕ್ತವಾಗುತ್ತಿದೆ. ರಾಜ್ಯದಲ್ಲಿ ಬಿಜೆಪಿ ನಾಯಕತ್ವ ಇಲ್ಲದ ಪಕ್ಷವಾಗಿದೆ. ಅವರು ಈವರೆಗೂ ವಿಪಕ್ಷ ನಾಯಕನ ಆಯ್ಕೆ ಮಾಡಿಲ್ಲ ಎಂದು ವ್ಯಂಗ್ಯವಾಡಿದರು.