ಬೆಂಗಳೂರು: ಬಿಜೆಪಿ ನೂತನ ರಾಜ್ಯಾಧ್ಯಕ್ಷರಾಗಿ ಬಿ.ಎಸ್ ಯಡಿಯೂರಪ್ಪ ಪುತ್ರ ಬಿ.ವೈ ವಿಜಯೇಂದ್ರ ಅಧಿಕೃತವಾಗಿ ಅಧಿಕಾರ ಸ್ವೀಕಾರ ಮಾಡಿದ್ದಾರೆ. ಈ ಮೂಲಕ ರಾಜ್ಯ ಬಿಜೆಪಿ ಕಾರ್ಯಕರ್ತರಿಗೆ ಬಲ ತುಂಬಿಸುತ್ತಿರುವ ಬಿಜೆಪಿ ಹೈಕಮಾಂಡ್, ರಾಜ್ಯದಲ್ಲಿ ವಿರೋಧ ಪಕ್ಷದ ನಾಯಕನ ಆಯ್ಕೆಗೆ ಮುಂದಾಗಿದೆ. ಇಂದು ನ. ೧೭ ಸಂಜೆ ಬೆಂಗಳೂರಿನ ಐಟಿಸಿ ಗಾರ್ಡೆನಿಯಾ ಹೋಟೆಲ್ನಲ್ಲಿ ಬಿಜೆಪಿ ಶಾಸಕಾಂಗ ಸಭೆ ನಡೆಯಲಿದ್ದು, ಸಭೆಯಲ್ಲಿ ವಿಪಕ್ಷ ನಾಯಕನ ಆಯ್ಕೆ ಪ್ರತಿಕ್ರಿಯೆ ನಡೆಯಲಿದೆ. ಇನ್ನು ಪ್ರತಿಪಕ್ಷ ಸ್ಥಾನಕ್ಕೆ ಹಲವಾರು ನಾಯಕರ ಹೆಸರುಗಳು ಕೇಳಿಬಂದಿದ್ದು, ಹೈಕಮಾಂಡ್ ಯಾರಿಗೆ ಮಣೆ ಹಾಕುತ್ತೆ ಎನ್ನುವುದು ಕುತೂಹಲ ಮೂಡಿಸಿದೆ.
ಎಲ್ಲಾ ಆಯಾಮಗಳಿಂದಲೂ ಲೆಕ್ಕಾಚಾರ ಹಾಕಿರುವ ಬಿಜೆಪಿ ಹೈಕಮಾಂಡ್ ಅಳೆದೂ ತೂಗಿ ಪ್ರಬಲ ನಾಯಕನ ಆಯ್ಕೆ ಮಾಡುವ ಜೊತೆಗೆ ಎರಡೆರಡು ಶಕ್ತಿ ಕೇಂದ್ರಗಳು ನಿರ್ಮಾಣ ಆಗದಂತೆ ಎಚ್ಚರಿಕೆ ವಹಿಸಿದ್ದು, ಶಾಸಕಾಂಗ ಪಕ್ಷದ ಸಭೆಯಲ್ಲಿ ಶಾಸಕರ ಅಭಿಪ್ರಾಯ ಸಂಗ್ರಹಿಸಿದ ಬಳಿಕ ಅಂತಿಮವಾಗಿ ಹೈಕಮಾಂಡ್, ಅಧಿಕೃತವಾಗಿ ವಿಪಕ್ಷ ನಾಯಕರ ಯಾರು ಎನ್ನುವುದನ್ನು ಹೆಸರು ಘೋಷಣೆ ಮಾಡಲಿದೆ ಎಂದು ತಿಳಿದುಬಂದಿದೆ.