ಬೆಂಗಳೂರು : ಮೈಸೂರು ನಗರದ ಗನ್ ಹೌಸ್ ಸರ್ಕಲ್ನಲ್ಲಿ ಸುತ್ತೂರು ಮಠದ ಶ್ರೀ ಶಿವರಾತ್ರಿ ದೇಶಿಕೇಂದ್ರ ರಾಜೇಂದ್ರ ಸ್ವಾಮೀಜಿ ಅವರ ಪ್ರತಿಮೆ ಸ್ಥಾಪನೆ ವಿವಾದ ಕರ್ನಾಟಕ ಹೈಕೋರ್ಟ್ ಮೆಟ್ಟಿಲೇರಿದೆ. ಅನಧಿಕೃತವಾಗಿ ಪ್ರತಿಮೆ ಸ್ಥಾಪಿಸಿದ್ದು, ಅದನ್ನು ತೆರವುಗೊಳಿಸಲು ನಿರ್ದೇಶಿಸುವಂತೆ ಕೋರಿ ಸಲ್ಲಿಸಲಾಗಿರುವ ಅರ್ಜಿ ಸಂಬಂಧ ರಾಜ್ಯ ಸರ್ಕಾರ ಹಾಗೂ ಮೈಸೂರು ನಗರ ಅಭಿವೃದ್ಧಿ ಪ್ರಾಧಿಕಾರಕ್ಕೆ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ.
ಸರ್ಕಲ್ನಲ್ಲಿ ಸ್ವಾಮೀಜಿ ಪ್ರತಿಮೆ ಅಥವಾ ಶ್ರೀಕಂಠದತ್ತ ನರಸಿಂಹರಾಜ ಒಡೆಯರ್ ಪ್ರತಿಮೆ ಯಾವುದು ಸ್ಥಾಪನೆ ಮಾಡಬೇಕೆಂಬ ವಿವಾದ ಹೊಸ ರೂಪ ಪಡೆದುಕೊಂಡಿದೆ. ಈ ಕುರಿತಂತೆ ಮೈಸೂರಿನ ಗಿರಿಯಾಭೋವಿ ಪಾಳ್ಯ ನಿವಾಸಿ ಸುಬ್ರಹ್ಮಣ್ಯ ಮತ್ತು ಕುರುಬರಹಳ್ಳಿ ನಿವಾಸಿ ಎನ್. ಶೀಲಾವತಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ, ಮುಖ್ಯ ನ್ಯಾಯಮೂರ್ತಿ ಪಿ. ಬಿ. ವರಾಳೆ ಮತ್ತು ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿದ್ದ ಏಕ ಸದಸ್ಯ ನ್ಯಾಯಪೀಠದ ಮುಂದೆ ವಿಚಾರಣೆಗೆ ಬಂದಿತ್ತು.
ನ್ಯಾಯಪೀಠವು ಕೆಲ ಕಾಲ ವಿಚಾರಣೆ ನಡೆಸಿದ ಬಳಿಕ ಅರ್ಜಿಯಲ್ಲಿ ಪ್ರತಿವಾದಿಗಳಾಗಿರುವ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ, ಮೈಸೂರು ಜಿಲ್ಲಾಧಿಕಾರಿ, ನಗರ ಅಭಿವೃದ್ಧಿ ಪ್ರಾಧಿಕಾರದ ಆಯುಕ್ತ, ನಗರ ಪೊಲೀಸ್ ಆಯುಕ್ತರು ಮತ್ತು ಮೈಸೂರು ವಿಭಾಗದ ಲೋಕೋಪಯೋಗಿ ಇಲಾಖೆ ಕಾರ್ಯಕಾರಿ ಇಂಜಿನಿಯರ್ಗೆ ನೋಟಿಸ್ ಜಾರಿಗೊಳಿಸಿ ವಿಚಾರಣೆ ಮುಂದೂಡಿದೆ