ಮೈಸೂರು : ಗುಜರಾತ್ ನಲ್ಲಿ ಸಾಮೂಹಿಕ ಅತ್ಯಾಚಾರಕ್ಕೆ ಒಳಗಾಗಿದ್ದ ಮಹಿಳೆಗೆ ಸುಪ್ರೀಂಕೋರ್ಟ್ ನ್ಯಾಯ ನೀಡಿದೆ.
ಇಪ್ಪತ್ತು ವರ್ಷಗಳ ಸುದೀರ್ಘ ಹೋರಾಟದ ನಂತರ ಸುಪ್ರೀಂ ಕೋರ್ಟ್ ಮಹಿಳೆಯರ ಗೌರವವನ್ನು ಎತ್ತಿ ಹಿಡಿದಿದೆ.ತಪ್ಪಿತಸ್ಥರಿಗೆ ಶಿಕ್ಷೆ ಆಗುವಂತೆ ನ್ಯಾಯಾಲಯ ತೀರ್ಪು ನೀಡಿರುವುದು ಸ್ವಾಗತಾರ್ಹ ಎಂದು ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಪುಷ್ಪ ಅಮರನಾಥ್ ಹೇಳಿದರು.
ನಗರದಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು,ಗುಜರಾತ್ ಸರ್ಕಾರ ಆರೋಪಿಗಳ ಪರವಾಗಿ ತೆಗೆದುಕೊಂಡಿದ್ದ ನಿಲುವಿಗೆ ಸುಪ್ರೀಂ ಕೋರ್ಟ್ ಚಾಟಿ ಬೀಸಿದೆ.ಬಿಜೆಪಿಯವರು ಎಂದೂ ಕೂಡ ಮಹಿಳೆಯರ ಪರವಾಗಿಲ್ಲ.ಭೇಟಿ ಬಚಾವೋ, ಭೇಟಿ ಪಡಾವೋ ಕೇವಲ ಘೋಷಣೆಯಾಗಿಯೇ ಉಳಿದಿದೆ.
11 ಮಂದಿ ಅತ್ಯಾಚಾರಿಗಳ ಪರ ನಿಂತ ಬಿಜೆಪಿಯನ್ನು ಮುಂಬರುವ ಲೋಕಸಭಾ ಚುನಾವಣೆಯಲ್ಲಿ ದೇಶದ ಜನರು ತಿರಸ್ಕರಿಸಬೇಕು.ಗುಜರಾತ್ ನಲ್ಲಿ ಅತ್ಯಾಚಾರಿಗಳ ಪರ ನಿಂತು ಮುಖಭಂಗಕ್ಕೀಡಾಗಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ತಮ್ಮ ಸ್ಥಾನಕ್ಕೆ ಕೂಡಲೇ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು.
ಅಯೋಧ್ಯೆಯಲ್ಲಿ ನಿರ್ಮಿಸಿರುವ ಶ್ರೀರಾಮ ಮಂದಿರದ ಉದ್ಘಾಟನೆಗೆ ಇದುವರೆಗೂ ರಾಷ್ಟ್ರಪತಿ ದ್ರೌಪದಿ ಮುರ್ಮುರವರಿಗೆ ಆಹ್ವಾನ ನೀಡಿಲ್ಲ.
ದೇಶದ ಪ್ರಥಮ ಪ್ರಜೆಯಾಗಿರುವ ರಾಷ್ಟ್ರಪತಿ ದ್ರೌಪದಿ ಮುರ್ಮು ಬುಡಕಟ್ಟು ಸಮುದಾಯಕ್ಕೆ ಸೇರಿದ್ದಾರೆ.
ನೂತನ ಸಂಸತ್ ಭವನದ ಉದ್ಘಾಟನೆಗೂ ರಾಷ್ಟ್ರಪತಿಯವರನ್ನು ಆಹ್ವಾನಿಸದೇ ಕಡೆಗಣಿಸಲಾಯಿತು.ಇನ್ನೂ ಕೂಡ ಕಾಲ ಮಿಂಚಿಲ್ಲ, ಆದಷ್ಟು ಬೇಗ ರಾಷ್ಟ್ರಪತಿಯವರನ್ನು ಶ್ರೀರಾಮಮಂದಿರದ ಉದ್ಘಾಟನಾ ಸಮಾರಂಭಕ್ಕೆ ಆಹ್ವಾನ ನೀಡಬೇಕು.ರಾಷ್ಟ್ರಪತಿಯವರನ್ನು ಆಹ್ವಾನಿಸಿದರೆ ಇಡೀ ದೇಶದ ಜನರನ್ನು ಆಹ್ವಾನಿಸಿದಂತಾಗುತ್ತದೆ.ಸಿಎಂ ಸಿದ್ದರಾಮಯ್ಯರನ್ನು ಕೂಡ ರಾಮಂದಿರದ ಉದ್ಘಾಟನೆಗೆ ಆಹ್ವಾನಿಸಿಲ್ಲ.
ಆದರೆ ನಾವು ಸಿದ್ದರಾಮಯ್ಯನವರಲ್ಲೇ ನಾವು ರಾಮನನ್ನು ನೋಡುತ್ತೇವೆ.ನಾವು ಕೂಡ ರಾಮನನ್ನು ಪೂಜಿಸುತ್ತೇವೆ ಎಂದರು.
ಮುಂಬರುವ ಲೋಕಸಭಾ ಚುನಾವಣೆಯಲ್ಲಿ ನಾನು ಕೂಡ ಚಾಮರಾಜನಗರ ಕ್ಷೇತ್ರದ ಪ್ರಬಲ ಟಿಕೆಟ್ ಆಕಾಂಕ್ಷಿಯಾಗಿದ್ದೇನೆ: ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಡಾ ಪುಷ್ಪಾ ಅಮರನಾಥ್ ಮೈಸೂರಿನಲ್ಲಿ ಹೇಳಿಕೆ.
ರಾಜ್ಯದ 28 ಕ್ಷೇತ್ರಗಳಲ್ಲಿ ಗೆಲ್ಲುವ ಸಾಮರ್ಥ್ಯ ಇರುವ ಕಡೆ ಮಹಿಳೆಯರಿಗೂ ಟಿಕೆಟ್ ನೀಡುವಂತೆ ಹೈಕಮಾಂಡ್ ಗೆ ಬೇಡಿಕೆ ಮುಂದಿಟ್ಟಿದ್ದೇವೆ. ನಾನು ಸಹ ಪಕ್ಷ ಸಂಘಟನೆಗಾಗಿ ರಾಜ್ಯದಾದ್ಯಂತ ಪ್ರವಾಸ ಮಾಡಿದ್ದೇನೆ. ಪಕ್ಷ ಸಂಕಷ್ಟದಲ್ಲಿದ್ದ ದಿನಗಳಲ್ಲೂ ಪಕ್ಷದ ಸಂಘಟನೆಗಾಗಿ ದುಡಿದಿದ್ದೇನೆ.ಕಳೆದ 2018ರ ವಿಧಾನಸಭೆ ಚುನಾವಣೆಯಲ್ಲೂ ಕೊಳ್ಳೇಗಾಲ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದೆ. ಆದರೆ ಕಡೆ ಗಳಿಗೆಯಲ್ಲಿ ಟಿಕೆಟ್ ಕೈ ತಪ್ಪಿತು.ಈಗ ಮುಂದಿನ ಲೋಕಸಭಾ ಚುನಾವಣೆಯಲ್ಲಿ ಚಾಮರಾಜನಗರ ಕ್ಷೇತ್ರದ ಪ್ರಬಲ ಟಿಕೆಟ್ ಆಕಾಂಕ್ಷಿಯಾಗಿದ್ದೇನೆ. ಈ ಬಾರಿ ನನಗೆ ಟಿಕೆಟ್ ಸಿಗುವ ವಿಶ್ವಾಸವಿದೆ ಎಂದು ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಡಾ ಪುಷ್ಪ ಅಮರನಾಥ್ ಹೇಳಿದರು