ಲೋಕಸಭೆ ಚುನಾವಣೆಗೆ ಬಿಜೆಪಿ, ಜೆಡಿಎಸ್ ಮೈತ್ರಿಕೂಟದಲ್ಲಿ ಮಂಡ್ಯ ಲೋಕಸಭಾ ಕ್ಷೇತ್ರದಿಂದ ಯಾರನ್ನು ಕಣಕ್ಕಿಳಿಸುತ್ತಾರೆ ಎಂಬುದೇ ಸದ್ಯ ಬಹಳಷ್ಟು ಕುತೂಹಲ ಮೂಡಿಸಿರುವ ಪ್ರಶ್ನೆ. ಜೆಡಿಎಸ್ ನಿಂದ ನಿಖಿಲ್ ಕುಮಾರಸ್ವಾಮಿ ಅವರನ್ನು ಕಣಕ್ಕಿಳಿಸುವ ಸಾಧ್ಯತೆ ಇದೆ ಎಂಬ ವದಂತಿಗಳ ಮಧ್ಯೆ, ಕಳೆದ ಬಾರಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಗೆಲುವು ಸಾಧಿಸಿದ್ದ ಸುಮಲತಾ ಅಂಬರೀಶ್ ಕೂಡ ಬಿಜೆಪಿ ಟಿಕೆಟ್ಗೆ ಪೈಪೋಟಿ ನಡೆಸುತ್ತಿದ್ದಾರೆ. ಮತ್ತೊಂದೆಡೆ, ಇತ್ತೀಚಿನ ವರದಿಗಳ ಪ್ರಕಾರ ಜೆಡಿಎಸ್ ನಾಯಕ ಹೆಚ್ಡಿ ಕುಮಾರಸ್ವಾಮಿ ಅವರೇ ಮಂಡ್ಯದಿಂದ ಕಣಕ್ಕಿಳಿಯಲಿದ್ದಾರೆ ಎಂಬುದು ಖಚಿತವಾಗಿದೆ.
ಕುಮಾರಸ್ವಾಮಿ ಕಣಕ್ಕೆ ಇಳಿದಿದ್ದೇ ಆದಲ್ಲಿ ಅವರ ವಿರುದ್ಧ ಪ್ರಬಲ ಎನ್ನಬಹುದಾದ ಅಭ್ಯರ್ಥಿ ಕಾಂಗ್ರೆಸ್ ಪಕ್ಷದಲ್ಲಿಲ್ಲ.ಅವರು ಸ್ಪರ್ಧೆ ಮಾಡಿದರೆ ಪಕ್ಷದ ಎಲ್ಲಾ ನಾಯಕರು, ಕಾರ್ಯಕರ್ತರು ಒಗ್ಗಟ್ಟಿನಿಂದ ಕೆಲಸ ಮಾಡುವ ಸಾಧ್ಯತೆ ಹೆಚ್ಚಿದೆ. ಇಷ್ಟೇ ಅಲ್ಲದೆ ಮಂಡ್ಯದಲ್ಲಿ ಕುಮಾರಸ್ವಾಮಿಗೆ ಬಹುದೊಡ್ಡ ಅಭಿಮಾನಿ ಬಳಗವಿದೆ. ಕುಮಾರಸ್ವಾಮಿ ಸ್ಪರ್ಧೆಯಿಂದ ಹಳೆ ಮೈಸೂರು ಭಾಗದಲ್ಲಿ ಪಕ್ಷಕ್ಕೆ ದೊಡ್ಡ ಶಕ್ತಿ ಬರಲಿದೆ. ಕಾರ್ಯಕರ್ತರಲ್ಲಿ ಕೂಡ ಹೊಸ ಹುರುಪು ಬರಲಿದೆ ಎಂಬ ಲೆಕ್ಕಾಚಾರ ಜೆಡಿಎಸ್ನದ್ದಾಗಿದೆ.
ಮತ್ತೊಂದೆಡೆ, ಕುಮಾರಸ್ವಾಮಿ ಲೋಕಸಭಾ ಚುನಾವಣೆಗೆ ಸ್ಪರ್ಧೆ ಮಾಡಿದ್ದೇ ಆದರೆ ಸುಮಲತಾ ಕೂಡ ಹೆಚ್ಚು ವಿರೋಧ ಮಾಡಲಾರರು ಎಂಬ ಅಂದಾಜು ಜೆಡಿಎಸ್ ನಾಯಕರದ್ದಾಗಿದೆ. ಈ ಎಲ್ಲ ಕಾರಣಗಳನ್ನು ಅಳೆದು ತೂಗಿ ಕುಮಾರಸ್ವಾಮಿಯೇ ಸ್ಪರ್ಧೆ ಮಾಡಲು ಮುಂದಾಗಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ.. ಆದಾಗ್ಯೂ ಮಂಡ್ಯ ಕ್ಷೇತ್ರದ ಅಭ್ಯರ್ಥಿ ವಿಚಾರವಾಗಿ ಬಿಜೆಪಿ, ಜೆಡಿಎಸ್ ಇನ್ನೂ ಅಂತಿಮ ಅಧಿಕೃತ ನಿರ್ಧಾರ ಪ್ರಕಟಿಸದಿರುವುದು ದಿನೇದಿನೇ ಕುತೂಹಲ ಹೆಚ್ಚಿಸುವಂತೆ ಮಾಡಿದೆ